ವಿಷಯಕ್ಕೆ ಹೋಗಿ

ಮೆಜೆಸ್ಟಿಕ್ ಎಂಬ ಮಾಯಾಜಾಲದೊಳಗೆ - ಕಥೆ - ಸಂಚಾರಿ ವಿಜಯ್

ಮೆಜೆಸ್ಟಿಕ್ ಎಂಬ ಮಾಯಾಜಾಲದೊಳಗೆ

(ಇದು ಸಂಚಾರಿ ವಿಜಯ್ ಸಾಯುವ ಎರಡು ದಿನ ಮುಂಚೆ ಬರೆದಿದ್ದ ಬರಹ. ಬಹಳಷ್ಟು ಕಡೆ ಪ್ರಕಟವಾಗಿದೆ. ಈಗ ಅವ್ವ ಪುಸ್ತಕಾಲಯ ಬಳಗದಿಂದ ಓದುಗರಿಗಾಗಿ ಮರುಪ್ರಕಟಿಸಲಾಗುತ್ತಿದೆ. ವಿಜಯ್ ಅವರ ಆತ್ಮಕ್ಕೆ ಅವ್ವ ಬಳಗವು ಸಂತಾಪ ಸೂಚಿಸಿದೆ. ನಮ್ಮೆಲ್ಲರ ಮಧ್ಯೆ ವಿಜಯ್ ಮತ್ತೊಮ್ಮೆ ಹುಟ್ಟಿ ಬರಲಿ.. ಓಂ ಶಾಂತಿ.. ನಮನಗಳು)


ವರುಷಗಳ ಹಿಂದೆ ನಮ್ಮ ಮನೆಯಲ್ಲಿ ನನ್ನ ಕೈಗೆ ಒಂದಿಷ್ಟು ಹಣ ಸಿಕ್ಕರೆ ಮುಗಿಯಿತು. ಹೇಳಿ ಕೇಳಿ ಶೋಕಿವಾಲನ ಬ್ರೀಡಿನಂತಿದ್ದ ನಾನು ಬೆಳ್ಳಂಬೆಳಗ್ಗೆ ಎದ್ದು ರೆಡಿಯಾಗಿ ಮುರುಕು ಮಸುಕು ಕನ್ನಡಿ ಮುಂದೆ ನಿಂತು ಕನ್ನಡಿಯ ಮೇಲಿನ ಧೂಳ್ಯಾವುದೂ ಪೌಡರ್ ಯಾವುದು ಗೊತ್ತಾಗದೆ ಅಳತೆ ಮೀರಿ ಮುಖದ ತುಂಬಾ ಪಾಂಡ್ಸ್ ಪೌಡರ್ ಮೆತ್ತಿಕೊಂಡು, ತಲೆಗೆ ಕೊಬ್ಬರಿ ಎಣ್ಣೆ ಸುರಿದು ಸೈಡಿನಿಂದ ಕ್ರಾಪು ತೆಗೆದು ಮೂವತ್ತು ರೂಪಾಯಿಯ ಕನ್ನಡಕ ಕಣ್ಣಿಗೆ ಬಿತ್ತೆಂದರೆ ಆಹಾ!!! ಜಗತ್ತೇ ಕಲರ್ಫುಲ್.

ನಮ್ಮ ತಂದೆಯ ಶೂ ನನಗೂ ಮುಕ್ಕಾಲು ಭಾಗ ಸೈಜ್ ಆಗುತ್ತಿದ್ದರಿಂದ ಸ್ವಲ್ಪ ಬಟ್ಟೆಯನ್ನು ಹಿಮ್ಮಡಿಯ ಜಾಗಕ್ಕೆ ತುರುಕಿ ಬಿಗಿ ಮಾಡಿ ನೀರಿನಿಂದ ಅದರ ಮೇಲ್ಮೈ ಎಲ್ಲ ಒರೆಸಿ ಎರೆಡೂ ಪಾದಗಳಿಗೆ ಕೂರಿಸಿ ಊರಲ್ಲಿ ಟಾರ್ ರೋಡ್ ಇರುತ್ತಿರಲಿಲ್ಲ. ಹೀಗಾಗಿ ಶೂಗೆ ಮಣ್ಣು ಮೆತ್ತಿಕೊಳ್ಳಬಾರದೆಂದು ತುದಿಗಾಲಿನಲ್ಲೇ ಸೂಕ್ಷ್ಮವಾಗಿ ನಡೆಯುತ್ತಾ ದಾರಿಯಲ್ಲಿ ಎದುರು ಸಿಗುತ್ತಿದ್ದ ಶನಿ ಮಹಾತ್ಮನ ಗುಡಿಗೆ ಡೈ ಹೊಡೆದು ಬಸ್ ಸ್ಟಾಂಡ್ ಗೆ ಬಂದರೆ ಊರಿಗೆ ಊರೇ ಈ ನವರಂಗಿಯ ಅವತಾರ ನೋಡಿ ಮೂರ್ಛೆ ಹೋಗದೆ ಉಳಿದರೆ ಪುಣ್ಯ....

ಇಂಥಾ ಈ ನವರಂಗಿ ನಮ್ಮೂರಿಂದ ಹೊರಡುವ ಬೆಂಗಳೂರು-ಚಿಕ್ಕಮಗಳೂರಿನ ಬಸ್ಸು ಹತ್ತಿದವನೇ ಮೊದಲು ಜೋಪಾನ ಮಾಡುತ್ತಿದ್ದುದು ಪ್ಯಾಂಟ್ ಒಳಗಿನ ಸುರಂಗದೋಪಾದಿಯಲ್ಲಿದ್ದ ಚಡ್ಡಿಯ ಜೇಬಿನ ಹೇರ್ ಪಿನ್ನನ್ನು. ಕಾರಣ ಇವನ ಹತ್ತಿರ ಇರುವ ಹಣವನ್ನು ಎಲ್ಲಿ ಯಾರು ಕದ್ದುಬಿಡುತ್ತಾರೋ ಎಂದು ಜೋಪಾನ ಮಾಡುತ್ತಿದ್ದುದು ದೊಗಳೆಯ ಪ್ಯಾಂಟ್ ಒಳಗಿನ ಚಡ್ಡಿ ಅದರ ಮೇಲೊಂದು ಜಗದಗಲದ ಜೇಬು ಅಲ್ಲಿ ಮನೆಯಿಂದ ತಂದ ಹಣನಿಧಿ. ಅದನ್ನು ಒಂದರ ಮೇಲೊಂದು ಸುರುಳಿಯಾಕಾರದಲ್ಲಿ ಸುತ್ತಿ ಅದಕ್ಕೊಂದು ರಬ್ಬರ್ ಬ್ಯಾಂಡ್ ಬಿಗಿದು, ಆ ಜೇಬನ್ನು ಸೀಲ್ ಮಾಡಲೆಂಬಂತೆ ಒಂದಷ್ಟು ಹೇರ್ ಪಿನ್ ಸಿಕ್ಕಿಸಿ ಎಂಥ ಚತುರ ಕಳ್ಳ ಕಾಕನೇ ಬಂದರೂ ಈ ಭದ್ರವಾದ ಕೋಟೆಯ ಒಂದು ಪಿನ್ನನ್ನೂ ಅಲುಗಾಡಿಸಲು ಅಸಾಧ್ಯವಾದಷ್ಟು ಸೇಫ್ಟಿ ಪಿನ್ನಿನ ಸೇಫ್ಟಿ....


ಭದ್ರವಾಗಿರುವುದು ಖಾತ್ರಿಯಾದ ಮೇಲೆ ಆಟ ಶುರು, ಅವರಿವರ ಜೊತೆ ಕಿತ್ತಾಡಿ ನೂಕಾಡಿ ತಳ್ಳಾಡಿ ಹಿಮಾಲಯ ಪರ್ವತದ ನೆತ್ತಿಯನ್ನೇ ಮುಟ್ಟಿದವನಂತೆ ಹೆಮ್ಮೆಯಿಂದ ಬೀಗುತ್ತಾ ಕೊನೆಗೂ ಡ್ರೈವರ್‌ನ ಎಡ ಪಕ್ಕದಲ್ಲಿರುವ ಉದ್ದನೆಯ ಸೀಟನ್ನು ಗಿಟ್ಟಿಸಿಕೊಂಡೆ ತೀರಬೇಕು. ಅಷ್ಟು ಸಾಲದೆಂಬಂತೆ ನಾವು ಕೂರುವ ಜಾಗ ಡ್ರೈವರ್ ಸೀಟಿಗಿಂತ ತುಸು ಮುಂದೆಯೇ ಇರಬೇಕು ಹಾಗಿದ್ದರೆ ನಾವು ಡ್ರೈವರಿಗಿಂತ ಮುಂದಿದ್ದೇವೆ ಎಂಬ ಮಂಕು ಗರ್ವ ಬೇರೆ ಅಲ್ಲದೆ ನಮ್ಮ ಎಡ ಭುಜ ಭುಜ ಆನಿಸಿಕೊಂಡೇ ಕೂರಬೇಕು.

ಅಪ್ಪಿ ತಪ್ಪಿ ಒಮ್ಮೆಲೇ ಬ್ರೇಕ್ ಏನಾದರೂ ಒತ್ತಿದರೆ ಗ್ಲಾಸು ಒಡೆದು ಬಸ್ಸಿನಾಚೆಗೆ ಮೊದಲನೇ ಪಲ್ಟಿ ಇವನೇ ಆಗಬೇಕು. ಹೇಗೆ ಮಂಗನಾಟ ಆಡುತ್ತ ಅಡ್ಡ ಕೂತು ಡ್ರೈವರ್ ಗೆ ಸರಿಯಾಗಿ ಹಿಂದಿನ ಮಿರರ್ ಕಾಣದೆ ಹತ್ತಾರು ಸಲ ಒರಟು ಲಾಲಿ ಹಾಡಿಸಿ ಕೊಳ್ಳದಿದ್ದರೆ ತಿಂದದ್ದು ಅರಗುವುದು ಎಲ್ಲಿಂದ....

ಅದರಲ್ಲೂ ಚಳಿಗಾಲವೋ ಅಥವಾ ಮಳೆಗಾಲವೇನಾದರೂ ಆಗಿದ್ದರಂತೂ ಮುಚ್ಚಿದ ಕಿಟಕಿಯ ಸಂದಿಯಿಂದ ಸಿಡಿಯುವ ಇರುಚಲು ನೀರನ್ನು ಪಕ್ಕದಲ್ಲಿ ಕುಳಿತಿದ್ದವರ ಮೇಲೆ ಸಿಡಿಯಲು ಬಿಟ್ಟು ಬೀಗುವುದೊಂದು ಖಯಾಲಿ. ಸ್ವಲ್ಪ ಥಂಡಿಯಾಯಿತೆಂದರೆ ಸಾಕು ಎರಡು ಮೊಣಕಾಲನ್ನು ಮತ್ತು ಅಂಗೈಯ್ಯನ್ನು ಬಾನೆಟ್‌ಗೆ ಒದ್ದುಕೊಂಡು ಕೂರುವುದು ಅದು ಬಿಸಿಯಾಗಿ ಅದರ ಶಾಖ ಮೊಣಕಾಲಿಗೋ ಅಂಗೈಗೋ ತಾಕಿದರೆ ಮನೆಯಲ್ಲಿ ಅಮ್ಮನ ಅಡುಗೆಯ ಒಲೆಯ ಮುಂದೆ ಕೂತು ಬಿಸಿ ಕಾಯಿಸಿದಷ್ಟೇ ಹಿತವಾದ ಅನುಭವ ನೀಡುವಂತೆ ಅನುಭವಿಸುವುದು.


ಹೀಗೆ ಹಿಂದಿನ ಸೀಟಿನಲ್ಲಿ ಕೂರುವವರಿಗೆ ಯಾರಿಗಾದರು ಉಂಟೆ ಈ ಸ್ವರ್ಗ ಸುಖ. ಜೊತೆಗೆ ಮುಂದೆ ಕೂತರೆ ಆ ಗ್ಲಾಸಿನ ಮೂಲಕ ಕಾಣುವ ಎಲ್ಲ ಹಳ್ಳಿಗಳನ್ನು ನೋಡುತ್ತಾ ಚುನಾವಣೆಯಲ್ಲಿ ಏನೋ ಭಾರಿ ಅಂತರದಲ್ಲಿ ಗೆದ್ದುಬಂದ ಕ್ಯಾಂಡಿಡೇಟ್‌ನಂತೆ ಚಿಳ್ಳೆಪಿಳ್ಳೆಗಳಿಂದ ಹಿಡಿದು ಕಂಡ ಕಂಡವರಿಗೆಲ್ಲಾ ಕೈ ಬೀಸಿದ್ದೇ ಬೀಸಿದ್ದು, ಏಕೆಂದರೆ ಎಲ್ಲಾ ಊರಿನ ಮುಂದಿನ ಉಸಾಬರಿ ಯೆಲ್ಲಾ ಮುಂದೆ ಕೂತ ಇವನದೇ ಅಲ್ಲವೇ? ಅದೂ ಅಲ್ಲದೆ ನಮ್ಮ ಬಸ್ಸು ಇರೋ ಬಾರೋ ವಾಹನಗಳನ್ನೆಲ್ಲಾ ಹಿಂದಿಕ್ಕಿ ಎಲ್ಲರಿಗಿಂತ ಮುಂದಿರಬೇಕು ಅಷ್ಟೇ ಯಾಕಂದ್ರೆ ಇದು ನಮ್ಮಪ್ಪ ಕೊಡಿಸಿದ್ದಲ್ಲವೇ?

ಆದರೆ ಇದೋ ಎಪ್ಪತ್ತು ಎಂಭತ್ತು ಸ್ಪೀಡ್ ಮುಟ್ಟಿದ ತಕ್ಷಣ ಲೇಯ್ ಯಾಕೋ ಹಿಂಗ್ ತುಳೀತಿಯ ನನ್ನಾ ಅಂತ ಬುಸುಗುಡುತ್ತಾ ಬಾನೆಟ್ ಒಳಗಿಂದ ಬಿಸಿ ನೀರ ಬುಗ್ಗೆಗಳ ತೆಗೆದು ನಮ್ಮ ಕಾಲುಗಳ ಮೇಲೆ ಸಿಡಿಸಿ ಆಗಾಗ ಸೇಡು ತೀರಿಸಿಕೊಳ್ಳುತ್ತಿತ್ತು. ಅಂಥದ್ರಲ್ಲಿ ನಮ್ಮ ಬಸ್ಸು ಯಾವುದಾದರೊಂದು ವಾಹನವನ್ನು ಹಿಂದಿಕ್ಕಿದರೆ ಮುಗಿಯಿತು ಫಾರ್ಮುಲಾ ಒನ್ ನಾವೇ ಗೆದ್ದಂತೆ ಕಿರುಚಿದ್ದೇ ಕಿರುಚಿದ್ದು.

ನಮ್ಮ ಡ್ರೈವರ್‌ಗೊ ಚಿಯರ್ ಗರ್ಲ್ ಚಿಯರ್ ಮಾಡುತ್ತಿರಬೇಕು ಎಂದೆನಿಸಿ ಮೈಮೇಲೆ ದೇವರ ಬರಿಸಿಕೊಂಡವನಂತೆ ಮುದ್ದೆ ಕೋಲು ತಿರುಗಿಸುವಂತೆ ಎಡಗೈ ನಿಂದ ಘಡ್ರ ಘಡ್ರ ಅಂತ ಗೇರ್ ತಿರುಗಿಸಿ ಹಾಕಿದವನೇ, ಮಳೆಗೆ ನೆಂದು ಬಿಸಿಲಿಗೆ ಒಣಗಿ ಕೊರಡಿನಂತಾಗಿರುತ್ತಿದ್ದ ಹಾರನ್‌ನ್ನು ಅಂಬೋ ಅಂತ ಕಿರುಚಿಸಿ ಬರ್ರೋ ಅನ್ನಿಸಿಬಿಡುತ್ತಿದ್ದರೂ ಅದರ ವೇಗ ಮಾತ್ರ ಅರವತ್ತೇ ಆಗಿರುತ್ತಿತ್ತು....


ಹೀಗೆ ಆಗರ್ಭ ತುಂಬಿರುತ್ತಿದ್ದ ನಮ್ಮ ಬಸ್ಸು ಯಾವುದಕ್ಕೂ ಜಗ್ಗದೆ ಕುಗ್ಗದೆ ಯಾರ ಮಾತಿಗೂ ಕಿವಿಗೊಡದೆ ಅಲ್ಲೊಂದು ಸಣ್ಣ ಗುಂಡಿಗೆ ನಮ್ಮನ್ನು ಅಲುಗಾಡಿಸಿ ಇಲ್ಲೊಂದು ದೊಡ್ಡ ಗುಂಡಿಗೆ ತನ್ನ ಎದೆ ಗೂಡನ್ನು ಕುಕ್ಕಿ ಎಡಗಡೆ ಇದ್ದವರನ್ನು ಬಲಕ್ಕೆ ಎಸೆದು ಬಲಗಡೆ ಇದ್ದವರನ್ನು ಎಡಕ್ಕೆ ನೂಕಿ, ತಳ್ಳಾಡಿಸಿ ಕಿರುಚಾಡಿಸಿ ಅರಚಾಡಿಸಿ ತನ್ನೊಡಲೊಳಗೊಂದು ಮಿನಿ ಕುರುಕ್ಷೇತ್ರ ಮಾಡಿಸಿ ತಾನು ಮಾತ್ರ ಏನು ಮಾಡದ ಗುಮ್ಮನಂತೆ ಮಧ್ಯಾಹ್ನದ ಊಟದ ಹೊತ್ತಿಗೆ ಬೆಂಗಳೂರಿನ ಮೆಜೆಸ್ಟಿಕ್ಕಿಗೆ ತಂದು ಬಿಡುತ್ತಿತ್ತು....

ಬೆಂಗಳೂರಿನ ಹೃದಯ ಭಾಗಕ್ಕೆ ಬಂದು ಇಳಿದವನಿಗೆ ಖುಷಿಯೋ ಖುಷಿ ಸಾಗರದಂತೆ ತುಂಬಿ ತುಳುಕುವ ಜನಸಾಗರ, ಅಲ್ಲಲ್ಲಿ ಕಾಣುವ ಎತ್ತರದ ಬಿಲ್ಡಿಂಗು, ಹೊಟ್ಟೆ ತುಂಬಾ ಉಂಡು ಹೊರಳಾಡುವಂತೆ ಆಡುವ VOLVO ಬಸ್ಸುಗಳು. ಮೆಜಸ್ಟಿಕ್ ಬ್ರಿಜ್ ಹತ್ತಿ ಎಡಕ್ಕೆ ನೋಡಿದರೆ ಬೆಂಗಳೂರಿನ ಮೂಲೆ ಮೂಲೆ ತಲುಪಿಸಲು ಸಾಲುಗಟ್ಟಿ ನಿಂತ BMTC ಬಸ್ಸುಗಳು ಅಲ್ಲೊಂದಷ್ಟು ಕಿಕ್ಕಿರಿದ ಜನಗಳು ಅವಕ್ಕೊಂದಷ್ಟು ಮಾರ್ಗದ ನಂಬರ್ಗಳು.

ಬಲಕ್ಕೆ ತಿರುಗಿದರೆ ನಮ್ಮನ್ನು ಊರುಗಳಿಗೆ ಹೊತ್ತೊಯ್ಯಲು ನಿಂತ ಕಡುಗೆಂಪು ಬಸ್ಸುಗಳು ಮತ್ತವುಗಳ ಮುಂದೆ ತಮಿಳುನಾಡು, ಆಂಧ್ರ, ಕಡಪ, ಶಿಮೊಗ್ಗ, ಮಂಗಳೂರು,ಉಡುಪಿ, ಕುಂದಾಪುರ, ಮಂಡ್ಯ, ಕೋಲಾರ, ರಾಯಚೂರು, ಮೈಸೂರು, ಹುಬ್ಬಳ್ಳಿ, ಧಾರವಾಡ ಅಂತ ಒಂದೇ ಸಮನೆ ಕಂಡಕ್ಟರುಗಳ ಕೂಗು.


ಈ ಮಧ್ಯೆ ಪ್ರೈವೇಟ್ ಬಸ್ಸುಗಳ ಕಂಡಕ್ಟರ್‌ಗಳು ತಾವೇನು ಕಡಿಮೆ ಎನ್ನುವಂತೆ ಬರೀ ಕೂಗುವುದಷ್ಟೇ ಅಲ್ಲ ಜೊತೆಗೆ ವಿಷಲ್ ಊದುತ್ತ ಊರುಗಳ ಹೆಸರು ಹೇಳುತ್ತಾ ಬಸ್ಸಿನ ಡೋರನ್ನು ಗುದ್ದಿದ್ದೇ ಗುದ್ದಿದ್ದು ಸದ್ಯ ಅವು ತಿಂದ ಹೊಡೆತಕ್ಕೆ ಉದುರಿ ಹೋಗದೆ ಉಳಿದದ್ದೇ ಹೆಚ್ಚು....

ಎರೆಡು ಬಸ್ಸು ನಿಲ್ದಾಣಗಳನ್ನು ಸೀಳಿಕೊಂಡ ಮೆಜೆಸ್ಟಿಕ್ ಸೇತುವೆ ದಾಟಿ ದಾರಿಯನ್ನು ಬಳಸಿ ಕೆಳಗಿಳಿದರೆ ತರೇವಾರಿ ಕೊಳ್ಳುವ ವಸ್ತುಗಳು, ಆಹಾ!!! ಎರೆಡು ಕಣ್ಣು ಸಾಲದು ಕಿವಿಗಳಂತೂ ಸಾಧ್ಯವೇ ಇಲ್ಲ ಬಿಡಿ ಒಬ್ಬರಿಗಿಂತ ಒಬ್ಬರು ನಾಮೇಲು ತಾಮೇಲು ಅಂತ ಕೂಗಿದ್ದೇ ಕೂಗಿದ್ದು.

ಅಲ್ಲಿಂದ ಸಾಗಿ ಮುಂದೆ ಬಂದು ಗಾಂಧಿನಗರದ ಸಂದಿಗೊಂದಿಗಳಲ್ಲಿ ಬಿರಿಯಾನಿ, ಪೂರಿ , ಇಡ್ಲಿ, ವಡೆಯ ಪರಿಮಳ ಹೀರಿ ಹೊರಬಂದರೆ ಅಲ್ಲಿ ಕಣ್ಣಿಗೆ ಬೇಕಾದ, ಬಡವರಿಗೆ ಸಾಮಾನ್ಯರಿಗೆ ಕೈಗೆಟುಕುವ ಸಸ್ತಾ ಬಟ್ಟೆಗಳನ್ನು ಮೈತುಂಬ ಹೊದ್ದುಕೊಂಡು ನಿಂತಿರುವ ಬಜಾರುಗಳು ಕಾಣಿಸುತ್ತವೆ. ಒಮ್ಮೆ ನಮ್ಮಂತ ಆಸೆಗಣ್ಣಿನ ಕಮಂಗಿಗಳು ಈ ಬಜಾರಿನ ಒಳ ಹೊಕ್ಕರೆ ಮುಗಿಯಿತು ಒಂದಾ ಮೈತುಂಬ ಬಟ್ಟೆಗಳು ಇರುತ್ತವೆ ಇಲ್ಲ ಮೈಮೇಲೆ ಇರುವ ಬಟ್ಟೆಗಳೂ ಮಾಯವಾಗಿಬಿಟ್ಟಿರುತ್ತವೆ....


ಹೀಗೆ ಬಜಾರಿನಲ್ಲಿ ಕಣ್ಣಿಗೆ ರಂಗು ರಂಗಾಗಿ ಕಾಣುವ ಬಟ್ಟೆಗಳನ್ನು ಕೊಂಡುಕೊಂಡು ವಾಪಸ್ಸು ಊರಿಗೆ ಹೋಗಿ ಬಸ್ ನಿಲ್ದಾಣದಲ್ಲಿ ಇಳಿದರೆ ಹೃತಿಕ್,ಸಲ್ಮಾನ್,ಶಾರುಖ್ ಎಂದು ಪೋಸು ಕೊಡುತ್ತಿದ್ದುದರಲ್ಲಿ ನನಗೇ ಆಗ್ರಸ್ಥಾನ. ಏಕೆಂದರೆ ನಮ್ಮಂತ ಸಾಮಾನ್ಯ ಅಥವಾ ಬಡ ಕುಟುಂಬದವರಿಗೆ ಬ್ರಾಂಡೆಡ್ ವಸ್ತುಗಳು ಅಥವಾ ಬಟ್ಟೆಗಳು ಶ್ರೀಮಂತರಿಗೆ ಮಾತ್ರ ಮೀಸಲು ಎಂದುಕೊಳ್ಳುತ್ತಿದ್ದ ಕಾಲವದು. ಹೀಗೆ ನಮ್ಮಂಥವರ ಕೈಗೆಟುಕುವ ಬಡವರ ಬಟ್ಟೆಯ ಬಜಾರಿನೊಳಕ್ಕೆ ಹೋದವನೇ ನನ್ನ ಅವತಾರವನ್ನು ಅಲ್ಲಿದ್ದವನೊಬ್ಬ ಗಮಿನಿಸಿ ಕೇಳಿಯೇಬಿಟ್ಟ....

'ಬಾ ಗುರು ಇಲ್ಲಿ ಯಾವ ಥರ ಬಟ್ಟೆ ಬೇಕು ಹೇಳು ತೋರಿಸುತ್ತೀನಿ ಇಲ್ಲಿ ಸಿಗೋ ಬಟ್ಟೆ ಸಿಂಗಾಪುರದಲ್ಲೂ ಸಿಗಲ್ಲ ನಿಂಗೆ' ಎಂದು ಕೈಹಿಡಿದು ಎಳೆದುಕೊಂಡು ಬಂದು ಅಲ್ಲಿದ್ದ ಎಲ್ಲ ಟೀಶರ್ಟ್ ಪ್ಯಾಂಟ್ ಗಳನ್ನೂ ನನ್ನ ಮುಂದೆ ಹರವಿಬಿಟ್ಟ. ನಾನು ಇವನನ್ನು ಏನು ಕೇಳೇ ಇಲ್ಲವಲ್ಲ ಎಂದು ಮನಸಿನೊಳಗೆ ಚಿಂತಿಸುತ್ತಿರುವಾಗಲೇ ಮತ್ತೊಂದಷ್ಟು ಬಟ್ಟೆಗಳ ತಂದು ಸುರುವಿಬಿಟ್ಟ.

ಅದೇಕೋ ಏನೋ ಯಾವೊಂದು ಶರ್ಟ್ ಪ್ಯಾಂಟು ನನಗೆ ಇಷ್ಟವಾಗಲಿಲ್ಲ. 'ಇಲ್ಲ ನನಗೆ ಇಷ್ಟ ಆಗಲಿಲ್ಲ' ಅಂದಿದ್ದೆ ತಡ ಪಕ್ಕದ ಅಂಗಡಿಯಿಂದ ಮತ್ತೊಂದು ಲಾಟು ಬಂದು ಬಿತ್ತು. ಇದು ಯಾಕೋ ಸರಿ ಹೋಗುತ್ತಿಲ್ಲ ಎಂದವನೇ 'ಯಾವುದು ಇಷ್ಟ ಆಗ್ತಾ ಇಲ್ಲ ಗುರು ನನ್ನ ಬಿಟ್ಬಿಡು' ಎಂದು ಗರಮ್ಮಾಗಿ ಹೇಳಿ ಹೊರಟವನ ಕೈಯ್ಯನ್ನು ಯಾರೋ ಹಿಡಿದು ಎಳೆದಂತಾಯ್ತು, ಹೊರಳಿ ನೋಡಿದರೆ ಅದೇ ಆಸಾಮಿ 'ಇಷ್ಟು ಬಟ್ಟೆ ತೋರಿಸಿದ್ದೀನಿ, ನೋಡಿದಮೇಲೆ ತಗೊಳ್ಳೇ ಬೇಕು, ಏನು ಆಟ ಆಡ್ತೀಯ' ಅಂದ.


'ಅಲ್ಲಾ ಗುರು ಮೊದಲನೇದಾಗಿ ನಾನು ನಿನ್ನನ್ನು ಮಾತನಾಡಿಸಲೇ ಇಲ್ಲ, ನೀನಾಗೆ ಕೈ ಹಿಡಿದು ಕರೆದುಕೊಂಡು ಬಂದು ಎಲ್ಲಾ ಸುರಿದೆ, ನೋಡು ಅಂದೆ, ಈಗ ನೋಡಿದರೆ ತಗೊಳ್ದೆ ಹೋಗೋ ಹಾಗೆ ಇಲ್ಲ ಅಂತ ಬೆದರಿಕೆ ಹಾಕ್ತಾ ಇದ್ದೀಯ, ಯಾವ ನ್ಯಾಯ' ಎಂದೆ. ಅಷ್ಟು ಹೊತ್ತಿಗೆ ಅಲ್ಲಿದ್ದ ಅಕ್ಕ ಪಕ್ಕದ ನಾಲ್ಕು ಜನ ಸೇರಿಕೊಂಡರು.

ಸ್ವಲ್ಪ ಧೈರ್ಯ ಬಂತು 'ಅಬ್ಬಾ ಸದ್ಯ ಇವನಿಂದ ಬಚಾವಾದೆ' ಎಂದು ನಿಟ್ಟುಸಿರು ಬಿಡುವ ಹೊತ್ತಿಗೆ ಅದರಲ್ಲಿದ್ದವನೊಬ್ಬ ಕೇಳಿದ 'ಯಾಕೆ ಗುರು ಒತ್ತಾಯ ಮಾಡ್ತಿಯಾ? ಅವನು ಇಲ್ಲೇ ತಗೋಳ್ತಾನೆ ಸುಮ್ನೆ ಇರು' ಎಂದು ನನಗೆ ಮೃದುವಾಗಿ ಒತ್ತಾಯ ಮಾಡಲು ಶುರು ಮಾಡಿದ, ಅದರ ಜೊತೆಗೆ ಉಳಿದವರೂ ನನಗೆ ಮೆಲ್ಲಗೆ ಗದರುವ ಧಾಟಿಯಲ್ಲಿ ಮಾತನಾಡಿದರು, ಆಗ ನನಗೆ ಅರಿವಾಯಿತು ಇವರೆಲ್ಲ ಒಬ್ಬರಿಗೊಬ್ಬರು ಗೊತ್ತಿರುವವರೇ ಅಂತ.

ನಾನು ಅವರ ಮಾತಿನ ಹೊಡೆತದಿಂದ ಸುಧಾರಿಸುವಷ್ಟರಲ್ಲಿ ನನ್ನನ್ನು ಅವರ ಅಂಗಡಿಯ ಒಳಕ್ಕೆ ಕರೆದುಕೊಂಡು ಹೋದವರೇ ಬಟ್ಟೆಯನ್ನು ತೆಗೆದುಕೊಳ್ಳುವವರೆಗೆ ಬಿಡದೆ ಹಿಂಸಿಸಿ ನನ್ನ ಬಳಿಯಿದ್ದ ಅಷ್ಟೂ ಹಣವನ್ನು ಪೀಕಿ ನನಗೆ ಇಷ್ಟವಿಲ್ಲದ ಬಟ್ಟೆಗಳನ್ನು ಕೈಗೆ ತುರುಕಿ ಹೊರ ಕಳುಹಿಸಿದರು... ಜೋಲು ಮುಖ ಹಾಕಿ ಸೀದಾ ಮೆಜೆಸ್ಟಿಕ್ ಕಡೆ ನಡೆದವನೇ, ಕಲ್ಲು ಬೆಂಚಿನ ಮೇಲೆ ಕೂತು ಬಟ್ಟೆ ಅಂಗಡಿಯವನಿಗೂ ಮತ್ತು ನನ್ನಿಂದ ಹಣವನ್ನು ಕಿತ್ತ ಅವನ ಜೊತೆಯವರಿಗೆ ಮನಸ್ಸಿನಲ್ಲಿ ಹಿಡಿ ಶಾಪ ಹಾಕಿ ಕುಳಿತಿದ್ದೆ.


ಅಷ್ಟರಲ್ಲಿ ನಮ್ಮೂರ ಬಸ್ಸು ಬಂದು ನಿಂತಿತು ಅದಾಗಲೇ ಹೆಚ್ಚು ಕಡಿಮೆ ಭರ್ತಿಯಾಗಿದ್ದ ಬಸ್ಸಿನಲ್ಲಿ ಸಿಕ್ಕಿದ್ದು ಕೊನೆಯ ಸಾಲಿನ ಕೊನೆಯ ಸೀಟು, ಇನ್ನು ನನಗೆ ಯಾರ ಊರಿನ ಯಾರ ಉಸಾಬರಿಯು ಇಲ್ಲ ಎಂದು ಯಾರಿಗೂ ಕೈಬೀಸದೆ ಅವರು ಕೊಟ್ಟ ಬಟ್ಟೆಯ ಬ್ಯಾಗನ್ನು ಅವಚಿ ಹಿಡಿದು ಹಾಗೆಯೇ ಅದರ ಮೇಲೆ ತಲೆಯೂರಿದ್ದಷ್ಟೇ, ಗೊತ್ತಿಲ್ಲದೇ ಗಾಢವಾದ ನಿದ್ರೆಗೆ ಜಾರಿದ್ದೆ. ಕಣ್ಣು ಬಿಟ್ಟು ನೋಡುವಾಗ ಊರ ಬಸ್ಸು ನಿಲ್ದಾಣದ ಹೆಬ್ಬಾಗಿಲ ಮುಂದೆ ನಿಂತು ಮಳೆಗೆ ತೊಯ್ದಿತ್ತು. ನಾನು ಯಾರಿಗೂ ಕಾಣದಂತೆ ಬಸ್ಸು ಇಳಿದವನೇ ನಸುಗತ್ತಲಿನಲ್ಲಿ ಮನೆ ಸೇರಿದೆ. ಹೀಗೆ ಮುಗಿದಿತ್ತು ಬಟ್ಟೆಯ ಪ್ರಸಂಗವೊಂದು.






                       ಸಂಚಾರಿ ವಿಜಯ್
                  ರಾಷ್ಟ್ರ ಪ್ರಶಸ್ತಿ ವಿಜೇತ ನಟ

ಕಾಮೆಂಟ್‌ಗಳು

  1. ವಿಜಯ್ ಸರ್ ಚೆನ್ನಾಗಿ ಕಥೆ ಬರೆದಿರುವಿರಿ. ನಿಮ್ಮಲ್ಲಿನ ಅಸಾಧಾರಣ ಪ್ರತಿಭೆ ನಿಮಗೆ ನೀವೇ ಸಾಟಿ. ಆದರೆ ಹೆಲ್ಮೆಟ್ ಹಾಕದೆ ತಂದುಕೊಂಡ ಸಂಚಕಾರಕ್ಕೆ ನಿಮ್ಮ ಪ್ರಾಣವನ್ನೇ ಬಲಿ ಕೊಡ ಬೇಕಾಯಿತು. ಸಂಚಕಾರ ಸಂಚಾರಕ್ಕೆ ಮುಕ್ತಾಯ ಹಾಡಿದ್ದು ವಿಪರ್ಯಾಸ.
    ನಿಮ್ಮ ಅಂಗಾಂಗ ದಾನ‌ ಮರಣದಲ್ಲೂ ನೀವು ತೋರಿದ ,ನಿಮ್ಮ ಪರೋಪಕಾರಾರ್ಥಂ ಇದಂ ಶರೀರಂ ಅನ್ನುವುದನ್ನು ಸಾರ್ಥಕ್ಯ ಪಡಿಸಿದಿರಿ. ನಿಮ್ಮ ಜೀವನ ಇತರ ಯುವ ಜನಾಂಗಕ್ಕೆ ಪಾಠವಾಗಲಿ.
    ‌‌‌‌‌ ಮರಳಿ ಕಲಾವಿದರಾಗೆ ಹುಟ್ಟಿ ಬನ್ನಿ. ನಿಮ್ಮ ಅಗಲಿಕೆ ನೋವಿನ ‌ಸಂಗತಿ. ನಿಮ್ಮ ಕುಟುಂಬದವರಿಗೆ , ಅಭಿಮಾನಿಗಳಿಗೆ ಸ್ನೇಹಿತರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ‌ ಭಾವಪೂರ್ಣ ಶ್ರದ್ಧಾಂಜಲಿ ಸರ್.

    ಪ್ರತ್ಯುತ್ತರಅಳಿಸಿ

ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಓದಬೇಕಾದ ಕನ್ನಡದ ಮಹತ್ತರ ಪುಸ್ತಕಗಳು - ಅವ್ವ ಪುಸ್ತಕಾಲಯ

" ಓದಬೇಕಾದ ಕೆಲವು ಕನ್ನಡ ಸಾಹಿತ್ಯ ಪುಸ್ತಕಗಳು " (ಇದು ನನ್ನ ಸುತ್ತಲಿನವರ ಅಭಿಪ್ರಾಯದ ಮೇರೆಗೆ ಓದುಗರಲ್ಲಿ ಅಭಿರುಚಿ ಹೆಚ್ಚಿಸಲು ಕಟ್ಟಿರುವ ಪಟ್ಟಿ. ನೀವು ಓದಿರುವ ಬೆಸ್ಟ್ ಪುಸ್ತಕಗಳು ಬಿಟ್ಟುಹೋಗಿದ್ದರೆ ದಯವಿಟ್ಟು ಸೇರಿಸಿ) ತೇಜಸ್ವಿ : ಮಹಾಪಲಾಯನ ಕರ್ವಾಲೋ ಪ್ಯಾಪಿಲಾನ್ ಚಿದಂಬರ ರಹಸ್ಯ ಜುಗಾರಿಕ್ರಾಸ್ ಭಯಾನಕ ನರಭಕ್ಷಕ ಕಿರಗೂರಿನ ಗಯ್ಯಾಳಿಗಳು ಅಬಚೂರಿನ ಫೋಸ್ಟಾಫೀಸು ಕೃಷ್ಣೇಗೌಡನ ಆನೆ ಅಣ್ಣನ ನೆನಪು ಹೊಸ ವಿಚಾರಗಳು  ಕೆ ಎನ್ ಗಣೇಶಯ್ಯ : ಶಾಲಭಂಜಿಕೆ ಆರ್ಯವೀರ್ಯ ಗುಡಿಮಲ್ಲಮ್ ಚಿತಾದಂತ ಬೆಳ್ಳಿಕಾಳಬಳ್ಳಿ ಶಿಲಾಕುಲವಲಸೆ ಕನಕಮುಸುಕು  ಕರಿಸಿರಿಯಾನ ಕಪಿಲಿಪಿಸಾರ ಎಸ್ ಎಲ್ ಬಿ : ಭಿತ್ತಿ ವಂಶವೃಕ್ಷ ಗೃಹಭಂಗ ನಾಯಿ ನೆರಳು ಕವಲು ಯಾನ ಸಾರ್ಥ ಪರ್ವ ದಾಟು ಮಂದ್ರ ಆವರಣ  ಅನ್ವೇಷಣ ತ.ರಾ.ಸು : ನಾಗರಹಾವು ಮಸಣದ ಹೂ ಹಂಸಗೀತೆ ಶಿಲ್ಪಶ್ರೀ ರಕ್ತರಾತ್ರಿ ತಿರುಗುಬಾಣ ದುರ್ಗಾಸ್ತಮಾನ  ಗಿರೀಶ್ ಖಾರ್ನಾಡ್ : ಆಡಾಡತ ಆಯುಷ್ಯ ತುಘಲಕ್ ತಲೆದಂಡ ಹಯವದನ ನಾಗಮಂಡಲ ಯಯಾತಿ  ವಸುದೇಂಧ್ರ : ಮೋಹನಸ್ವಾಮಿ ಹಂಪಿ ಎಕ್ಸ್ ಪ್ರೆಸ್ ತೇಜೋ ತುಂಗಭದ್ರ ನಮ್ಮಮ್ಮ ಅಂದ್ರೆ ನಂಗಿಷ್ಟ ಐದು ಪೈಸೆ ವರದಕ್ಷಿಣೆ  ಜೋಗಿ : L ಅಶ್ವತ್ಥಾಮನ್ ಬೆಂಗಳೂರು ಸೀರೀಸ್  ಹಲಗೆ ಬಳಪ ಜಾನಕಿ ಕಾಲಂ ಚಂ. ಶೇ. ಕಂ : ಜೋಕುಮಾರಸ್ವಾಮಿ ಸಂಗ್ಯಾಬಾಳ್ಯ ಸಾಂಬಶಿವ ಪ್ರಹಸನ ಸಿರಿಸಂಪಿಗೆ ಮಹಾಮಾಯಿ ಸಿಂಗಾರೆವ್ವ & ಅರಮನೆ...

ಸಾಹಿತ್ಯ ಸ್ಪರ್ಧೆಗಳು 2023

ವಾರ್ಷಿಕೋತ್ಸವ ಸ್ಪರ್ಧೆಗಳು 2023 ಅವ್ವ ಪುಸ್ತಕಾಲಯ ಸಾಹಿತ್ಯ ಬಳಗದ ವತಿಯಿಂದ ವಾರ್ಷಿಕೋತ್ಸವದ ಪ್ರಯುಕ್ತ ಸಾಹಿತ್ಯ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತರೆಲ್ಲರೂ ಭಾಗವಹಿಸಬಹುದು. ಯಾವುದೇ ವಯಸ್ಸಿನ ಮಿತಿ ಇಲ್ಲ. ಯಾವುದೇ ನೊಂದಣಿ ಇರುವುದಿಲ್ಲ. ಸ್ಪರ್ಧೆ 01 - ಪದಬಂದ ರಚನೆ * 4×4 ಮನೆಯ ಪದಬಂಧ ರಚಿಸಬೇಕು. * ಹಾಳೆ ಮೇಲೆ ಬರೆದು ಫೋಟೋ ಕಳಿಸಬಹುದು. * ಕನ್ನಡ ಸಾಹಿತ್ಯ ಪುಸ್ತಕಗಳ ಹೆಸರು, ಲೇಖಕರು, ಪ್ರಶಸ್ತಿಗಳು, ಕೃತಿಯಲ್ಲಿ ಬರುವ ಊರು, ಪಾತ್ರ ಇವುಗಳನ್ನು ಬಳಸಿಕೊಳ್ಳಬಹುದು. ಸ್ಪರ್ಧೆ 02 - ಸ್ವರಚಿತ ಕವನ ಸ್ಪರ್ಧೆ * ಗರಿಷ್ಟ 20 ಸಾಲುಗಳ ಕವನ ರಚಿಸಬೇಕು. * ಯಾವುದೇ ವಿಷಯದ ಮೇಲೆ ಕವಿತೆ ರಚಿಸಬಹುದು. ಸ್ವರಚಿತವಾಗಿರಬೇಕು. ಈ ಹಿಂದೆ ಎಲ್ಲೂ ಪ್ರಕಟವಾಗಿರಬಾರದು. * ಆಯ್ಕೆಯಾದರೆ 2024ರ ಜನೆವರಿಯಲ್ಲಿ ನಡೆಯುವ ಅವ್ವ ಪುಸ್ತಕಾಲಯ ವಾರ್ಷಿಕೋತ್ಸವದ ಕವಿಗೋಷ್ಠಿಯಲ್ಲಿ ಪಾಲ್ಗೊಳ್ಳಬೇಕಾಗುತ್ತದೆ. ಪದಬಂಧ ಹಾಗೂ ಸ್ವರಚಿತ ಕವಿತೆಯನ್ನು ಮೇಲ್ ಮಾಡಲು ಡಿಸೆಂಬರ್ - 31- 2023 ಕೊನೆಯ ದಿನ. ತೀರ್ಪುಗಾರರ ತೀರ್ಮಾನವೇ ಅಂತಿಮ. ಮೇಲ್ : avvapustakaalaya@gmail.com ಪದಬಂಧ ಸ್ಪರ್ಧೆಯಲ್ಲಿ ಅತ್ಯುತ್ತಮವೆನಿಸಿದ ಐವರಿಗೆ & ಸ್ವರಚಿತ ಕವನ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಹತ್ತು ಜನರಿಗೆ ಪ್ರಶಸ್ತಿಪತ್ರ, ಪುಸ್ತಕ ಬಹುಮಾನ ಹಾಗೂ ನಗದು ಬಹುಮಾನವಿರುತ್ತದೆ.

Avva Pustakalaya

ಅವ್ವ ಪುಸ್ತಕಾಲಯ ಸಾಹಿತ್ಯ ಬಳಗವು 2020 ರ ಏಪ್ರಿಲ್ 04 ರಂದು ಶ್ರೀಮಾನ್ ಲೇಟ್ ನಾರಸಯ್ಯ ಅವರ ಸ್ಮರಣಾರ್ಥವಾಗಿ ರೂಪುಗೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ತನ್ನದೇ ಆದ ಓದುಗರ ಬಳಗವನ್ನು ಹೊಂದಿದೆ. ಇದು ಡಿಜಿಠಲ್ ಗ್ರಂಥಾಲಯವಾಗಿದ್ದು, ಓದಿನ ಅಭಿರುಚಿ ಹಬ್ಬಿಸಲು ಬಹಳಷ್ಟು ಸಾಹಿತ್ಯ ಚಟುವಟಿಕೆಗಳು ಮತ್ತು ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗುತ್ತದೆ. ಪ್ರತೀ ವರ್ಷ ಜುಲೈ ತಿಂಗಳಲ್ಲಿ ಪ್ರಕಟಿತ ಕೃತಿಗಳನ್ನು ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿಗೆ ಆಹ್ವಾನಿಸಲಾಗುವುದು. ಆಯ್ಕೆಯಾದ ಕೃತಿಗಳಿಗೆ ಪ್ರಶಸ್ತಿಯ ಜೊತೆಗೆ ಐದು ಸಾವಿರ ರೂಪಾಯಿ ಮೌಲ್ಯದ ಪುಸ್ತಕಗಳನ್ನು ಹಂಚಿ, ಅವರ ಪುಸ್ತಕಗಳನ್ನು ಅವ್ವ ಪುಸ್ತಕಾಲಯ ವೇದಿಕೆಯ ಮುಖೇನ ಓದುಗರಿಗೆ ಮುಟ್ಟಿಸಲಾಗುವುದು . ಈಗಾಗಲೇ ಅವ್ವ ಪುಸ್ತಕಾಲಯದಿಂದ ಪ್ರಧಾನ ಕಾರ್ಯದರ್ಶಿಗಳಾದ  ಯುವಲೇಖಕ ಅನಂತ ಅವರ ಮೂರು ಕೃತಿಗಳು ಪ್ರಕಟವಾಗಿದ್ದು ಅವುಗಳು ಓದುಗರಿಗೆ ರಿಯಾಯಿತಿ ದರದಲ್ಲಿ ಸಿಗುತ್ತಿವೆ. ಓದುಗರು ನಮ್ಮನ್ನು ಸಂಪರ್ಕಿಸುವ ಮೂಲಕ ಪುಸ್ತಕಗಳನ್ನು ಕೊಂಡು ಓದಬಹುದು. ಮತ್ತು ನಮ್ಮ ಸಾಹಿತ್ಯ ಚಟುವಟಿಕೆಗಳು ಮತ್ತು ಸ್ಪರ್ಧೆಗಳಲ್ಲಿ ಭಾಗವಹಿಸಬಹುದು. 1). ಅವ್ವ ಪುಸ್ತಕಾಲಯ #189, ಕೆಂಚನಹಳ್ಳಿ ಅಂಚೆ ಹುಲಿಯೂರುದುರ್ಗ ಹೋಬಳಿ ಕುಣಿಗಲ್ ತಾಲ್ಲೂಕು ತುಮಕೂರು - 572123 ಮೊ : 8548948660 Mail :  avvapustakaalaya@gmail.com 2).  Facebook....